ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮೂರು ದಿನಗಳಿಂದ ಕಾಣೆಯಾಗಿದ್ದ ಮಧು ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಅಪಾಯಕಾರಿ ತಿರುವಿನ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರು ಆಕ್ರೋಶ.
ತುಮಕೂರು (ನ.24): ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಇಂದು ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ದುರ್ದೈವಿಯನ್ನು ಮಧು (38) ಎಂದು ಗುರುತಿಸಲಾಗಿದೆ. ಮಧುಗಿರಿ ತಾಲೂಕಿನ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ವ್ಯಕ್ತಿ ಕಾಣೆಯಾಗಿದ್ದ ಬಗ್ಗೆ ಈ ಹಿಂದೆಯೇ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಾಗಿತ್ತು.
ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿರುವ ಶಂಕೆ:
ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯಲ್ಲಿರುವ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗೆ ಬಿದ್ದು ಮಧು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ಜಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಸಾವು
ಅಪಘಾತದಿಂದ ಸಂಭವಿಸಿದ ಸಾವು ಮತ್ತು ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮಧುಗಿರಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.


