ಬಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ದಸರಾ ಧಾರ್ಮಿಕ ವಿಚಾರ ಅಲ್ಲವೇ ಅಲ್ಲ. ನಾಡಹಬ್ಬವಾಗಿರುವ ದಸರಾ ಸಾಂಸ್ಕೃತಿಕ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಸೆ.20): ದಸರಾ ಧಾರ್ಮಿಕ ವಿಚಾರ ಅಲ್ಲವೇ ಅಲ್ಲ. ನಾಡಹಬ್ಬವಾಗಿರುವ ದಸರಾ ಸಾಂಸ್ಕೃತಿಕ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ವಾರ್ತಾಸೌಧದಲ್ಲಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಅವರಿಗೆ ದಸರಾ ಉದ್ಘಾಟಿಸಲು ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ತಿರಸ್ಕೃತಗೊಂಡಿವೆ. ಇದನ್ನು ಸ್ವಾಗತಿಸುತ್ತೇನೆ ಎಂದರು.

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಸರ್ವಧರ್ಮಗಳ ಬಗ್ಗೆ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾಲತಾಣದಲ್ಲಿ ಪೋಸ್ಟ್: ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು. ಆದರೂ, ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜನ ಏಕೆ ಮತಾಂತರಗೊಳ್ಳುತ್ತಿದ್ದರು?

ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಪ್ರತಿಪಾದಿಸಿದ್ದಾರೆ. ಮತಾಂತರದ ಬಗ್ಗೆ ಪ್ರತಿಕ್ರಿಯಿಸಿ, ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು. ಅಸ್ಪೃಶ್ಯತೆ ಏಕೆ ಬಂತು? ಅದನ್ನು ನಾವು ಹುಟ್ಟು ಹಾಕಿದ್ದೇವೆಯೇ? ಎಂದು ಪ್ರಶ್ನಿಸಿದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಎಲ್ಲಾ ಧರ್ಮದಲ್ಲಿ ಇದ್ದರೂ, ಮತಾಂತರ ಆಗಿ ಎಂದು ಹೇಳಿಲ್ಲ. ಆದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದು ಹೇಳಿದರು.

ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿಗಣತಿಯಲ್ಲಿ ಹೊಸ ಜಾತಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಮುಂಬರುವ ಜನಗಣತಿ ವೇಳೆ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಜನ ಮತಾಂತರಗೊಳ್ಳುತ್ತಾರೆ. ನಾನು ಮುಸ್ಲಿಂ ಆಗಿ ಮತಾಂತರ ಆದರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವಾ? ನಾನೇನು ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆ ಆಗಿ ಹೇಳಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.