ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಗಾದಿಗಾಗಿ ನಡೆಯುತ್ತಿರುವ ನಡೆಯುತ್ತಿರುವ ಸಂಘರ್ಷದ ಕುರಿತು ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮತ್ತೊಂದು ಸುತ್ತಿನಲ್ಲಿ ಚರ್ಚೆ ನಡೆಸಿದೆ. ಸೋನಿಯಾ ಗಾಂಧಿ ನಿವಾಸದಲ್ಲಿ ಈ ‘ಹೈ ವೋಲ್ಟೇಜ್‌’ ಸಭೆ ನಡೆದಿದೆ.

ನವದೆಹಲಿ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಗಾದಿಗಾಗಿ ನಡೆಯುತ್ತಿರುವ ನಡೆಯುತ್ತಿರುವ ಸಂಘರ್ಷದ ಕುರಿತು ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮತ್ತೊಂದು ಸುತ್ತಿನಲ್ಲಿ ಚರ್ಚೆ ನಡೆಸಿದೆ. ಸೋನಿಯಾ ಗಾಂಧಿ ನಿವಾಸದಲ್ಲಿ ಈ ‘ಹೈ ವೋಲ್ಟೇಜ್‌’ ಸಭೆ ನಡೆದಿದೆ.

ವಾರದ ಹಿಂದಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಜೊತೆ ಮಾತುಕತೆ ನಡೆಸಿ, ಬಳಿಕ ಈ ಕುರಿತು ಸೋನಿಯಾ ಗಾಂಧಿಗೆ ವರದಿ ನೀಡಿದ್ದರು. ಅಲ್ಲದೆ, ಕಳೆದ ಬುಧವಾರ ಮಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಕೂಡ ಸಿದ್ದರಾಮಯ್ಯ ಜೊತೆ ಸುಮಾರು 15 ನಿಮಿಷಗಳ ಕಾಲ ರಹಸ್ಯ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ದೆಹಲಿಯಲ್ಲಿ ಸೋನಿಯಾ ನೇತೃತ್ವದಲ್ಲಿ ಉನ್ನತ ನಾಯಕರ ಸಭೆ ನಡೆದಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಹೊಸ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸ, ಜನಪತ್ 10ರಲ್ಲಿ ಸತತ 2 ಗಂಟೆಗಳ ಕಾಲ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಭಾಗಿಯಾಗಿದ್ದರು. ಸಭೆಯಲ್ಲಿ ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಸಂಘರ್ಷ, ಇದರಿಂದ ಪಕ್ಷದ, ರಾಜ್ಯ ಸರ್ಕಾರದ ಮೇಲೆ ಆಗುತ್ತಿರುವ ಪರಿಣಾಮ, ಮುಂದೆ ಕೈಗೊಳ್ಳಬೇಕಾದ ಕ್ರಮಗಳು, ಅದರಿಂದ ಆಗಬಹುದಾದ ರಾಜಕೀಯ ಪರಿಣಾಮಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೆ.ಸಿ.ವೇಣುಗೋಪಾಲ್‌, ಸಭೆಯಲ್ಲಿ ಕರ್ನಾಟಕ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಿತು. ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಸಂಘರ್ಷ ಕುರಿತಾಗಿಯೂ ಚರ್ಚೆ ನಡೆಸಲಾಯಿತು. ಅಲ್ಲದೆ, ಡಿಸೆಂಬರ್‌ 14ರ ‘ವೋಟ್‌ ಚೋರಿ’ ರ್‍ಯಾಲಿ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸೋನಿಯಾ ಗಾಂಧಿಯವರ ಸಮ್ಮುಖದಲ್ಲಿಯೇ ಈ ಬಗ್ಗೆ ಚರ್ಚೆ ನಡೆಯಿತು. ಆದರೆ, ಇಂದಿನ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲಾಗಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಕರ್ನಾಟಕದಲ್ಲಿ ಪಕ್ಷದಲ್ಲಿ ಯಾವುದೇ ಒಡಕಿಲ್ಲ. ನಾವು ಒಗ್ಗಟ್ಟಾಗಿ ಇದ್ದೇವೆ ಎಂದು ಪ್ರತಿಪಾದಿಸಿದರು. ಆದರೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರಿಗೆ ಬುಲಾವ್ ನೀಡುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಒಂದೇ ಕಾರಲ್ಲಿ ಖರ್ಗೆ, ಡಿಕೆಶಿ ಪ್ರಯಾಣ:

ತೀವ್ರ ಕುತೂಹಲಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಸೌಧದಿಂದ ಸದಾಶಿವನಗರದ ನಿವಾಸದವರೆಗೆ ಒಂದೇ ಕಾರಿನಲ್ಲಿ ತೆರಳಿ ಗಮನ ಸೆಳೆದರು. ನಾಯಕತ್ವ ಬದಲಾವಣೆ ಗೊಂದಲದ ಸಂದರ್ಭದಲ್ಲಿ ಖರ್ಗೆ ಮತ್ತು ಶಿವಕುಮಾರ್‌ ಅವರು ಸದಾಶಿವನಗರದಿಂದ ವಿಮಾನ ನಿಲ್ದಾಣ ವರೆಗೆ ಒಂದೇ ಕಾರಿನಲ್ಲಿ ತೆರಳಿ, ಅಲ್ಲಿನ ವಿಐಪಿ ಲಾಂಜ್‌ನಲ್ಲಿ ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚಿಸಿದ್ದರು. ಆ ಸಂದರ್ಭದಲ್ಲಿ ಈ ನಾಯಕರ ನಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅದರ ಬೆನ್ನಲ್ಲೇ ಮತ್ತೆ ಉಭಯ ನಾಯಕರು ಆಪ್ತ ಮಾತುಕತೆ ನಡೆಸಿದ್ದಾರೆ.

ಮತ್ತೆ ಒಗ್ಗಟ್ಟು ಪ್ರದರ್ಶಿಸಿದ ಸರ್ಕಾರದ ಜೋಡೆತ್ತು

ಅಧಿಕಾರ ಹಸ್ತಾಂತರ ಕುರಿತ ಚರ್ಚೆಗಳಿಗೆ ಬ್ರೇಕ್‌ ಹಾಕಲು ಇತ್ತೀಚೆಗೆ ಪರಸ್ಪರರ ಮನೆಗೆ ಉಪಾಹಾರ ಸೇವಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಶನಿವಾರ ಹಾಸನದ ಕಾರ್ಯಕ್ರಮದಲ್ಲಿ ಒಂದಾಗಿ ಕಾಣಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದರು.