‘ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಕುರಿತು ಯಾವುದೇ ಚರ್ಚೆ ಇಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಎರಡ್ಮೂರು ಸಲ ಹೇಳಿದ್ದಾರೆ. ಹೀಗಾಗಿ ಆ ಸಮಯ ಬಂದಾಗ ಮಾತನಾಡುತ್ತೇವೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರು (ಅ.29): ‘ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಕುರಿತು ಯಾವುದೇ ಚರ್ಚೆ ಇಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಎರಡ್ಮೂರು ಸಲ ಹೇಳಿದ್ದಾರೆ. ಹೀಗಾಗಿ ಆ ಸಮಯ ಬಂದಾಗ ಮಾತನಾಡುತ್ತೇವೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ದಲಿತ ಮುಖ್ಯಮಂತ್ರಿ ಅಥವಾ ದಲಿತ ಸಮಾವೇಶದ ಬಗ್ಗೆ ಸದ್ಯ ಮಾತನಾಡುವುದಿಲ್ಲ. ದಲಿತರು ಮುಖ್ಯಮಂತ್ರಿಯಾದರೆ ಒಳ್ಳೆಯದು. ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದರಿಂದ ಈ ಬಗ್ಗೆ ಯಾವುದೇ ಚರ್ಚೆಯಿಲ್ಲ ಎಂದು ಸ್ಪಷ್ಟಪಡಿಸಿದರು. ದಲಿತ ಸಮಾವೇಶ ಮಾಡುತ್ತೇವೆ. ಆದರೆ ಅದು ಸಮಾಜದ ಸಮಾವೇಶವೇ ಅಥವಾ ಪಕ್ಷದ ಸಮಾವೇಶ ಎಂಬುದು ಚರ್ಚೆ ಮಾಡಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಾಲ್ಮೀಕಿ ಸಮಾಜ ಮೇಲೆತ್ತುವ ಕೆಲಸವಾಗಬೇಕಿದೆ

ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮೇಲೆತ್ತುವ ಕೆಲಸವಾಗಬೇಕಿದೆ ಎಂದು ಹೇಳಿದರು. ಸಮಾಜದ ಅಭಿವೃದ್ಧಿಗಾಗಿ ಇಂಥ ಕಾರ್ಯಕ್ರಮ ನಡೆಯಬೇಕು. ಸಮಾಜದ ಸ್ಥಿತಿ ಸುಧಾರಿಸುವ ಅದರ ಬಗ್ಗೆ ಚರ್ಚಿಸುವ ಕೆಲಸವಾಗ ಬೇಕಿದೆ ಎಂದು ಹೇಳಿದರು. ಡಾ.ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನದ ಫಲವಾಗಿ ಇಂದು ಸಮಾಜ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರ ಅನೇಕ ಯೋಜನೆಗಳು, ಸಾಲಸೌಲಭ್ಯಗಳನ್ನು ಸಮಾಜಕ್ಕೆ ನೀಡಿದೆ. ಅವುಗಳ ಸದುಪಯೋಗಪಡಿಸಿಕೊಂಡು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಸಮಾಜ ಮುಂದೆ ಬರಬೇಕು. ಆ ನಿಟ್ಟಿನಲ್ಲಿ ಕೆಲಸಗಳು ನಡೆಯಬೇಕು.

ಮಹರ್ಷಿ ವಾಲ್ಮೀಕಿ ಅವರ ಮಾರ್ಗದರ್ಶನದಲ್ಲಿ ನಡೆಯಬೇಕು. ಅವರ ಆದರ್ಶ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ದೇಶದಾದ್ಯಂತ ಜಾತೀಯತೆ ಹೆಚ್ಚುತ್ತಿದೆ. ರಾಜಕೀಯ ಲಾಭಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ನಡೆಯುತ್ತಿದೆ. ಮನೆಗಳಲ್ಲಿ ಯಾವುದೇ ಸಂಪ್ರದಾಯ, ದೇವರ ಪೂಜಾ ಪದ್ಧತಿಗಳಿದ್ದರೂ ನಾವೆಲ್ಲ ಹಿಂದೂಗಳು, ಸನಾತನ ಧರ್ಮದವರು ಎಂಬ ಭಾವನೆ ಬರಬೇಕಿದೆ. ರಾಮಾಯಣ ಮಹಾಕಾವ್ಯ ರಚಿಸಿದ್ದು ವಾಲ್ಮೀಕಿ ಮಹರ್ಷಿಗಳು, ಶ್ರೀರಾಮ ಕ್ಷತ್ರಿಯ, ಶ್ರೀಕೃಷ್ಣ ಗೊಲ್ಲರ ಕುಲದವ, ಅವರನ್ನು ಪೂಜಿಸುವರು ಬ್ರಾಹ್ಮಣರು. ಆದರೆ ಈಗ ಜನಿವಾರ ಧರಿಸುವವರು ಮಾತ್ರ ಹಿಂದುಗಳು ಎಂಬ ಭಾವನೆ ಬಿತ್ತುವ ಕೆಲಸ ನಡೆದಿದೆ.

ಹಿಂದು ಎಂದರೆ ಅದು ಜಾತಿಯ ಪ್ರತೀಕ ಅಲ್ಲ, ಅದೊಂದು ಜೀವನ ಪದ್ಧತಿ. ಉಳಿದೆಲ್ಲ ಸಂಸ್ಕೃತಿಗಳಿಗೆ ಆಧಾರಗಳಿವೆ, ಆದರೆ ಹಿಂದು ಮಾತ್ರ ಸನಾತನ, ಆದಿ ಅಂತ್ಯ ರಹಿತವಾದ ಪದ್ಧತಿಯಾಗಿದೆ. ದೇವನಿರ್ಮಿತ ದೇಶ ಭಾರತ. 15 ಲಕ್ಷವರ್ಷಗಳ ಹಿಂದೆ ಶ್ರೀರಾಮ ಸೇತು ನಿರ್ಮಾಣವಾಗಿದೆ ಎಂದು ವಿಜ್ಞಾನಿಗಳೇ ಖಚಿತಪಡಿಸಿದ್ದಾರೆ. ಮಹಾತ್ಮ ಗಾಂಧಿ ಅವರು ಭಾರತವನ್ನು ದೇವರನಾಡು ಎಂದು ಕರೆದಿದ್ದಾರೆ. ವಿಶ್ವದಲ್ಲಿ ಭಾರತ ಅತ್ಯಂತ ಬಲಿಷ್ಠ ಮತ್ತು ಶ್ರೀಮಂತ ರಾಷ್ಟ್ರವಾಗಲಿದೆ. ಸಾಧು ಸಂತರ ಮಾರ್ಗದರ್ಶನದಲ್ಲಿ ಒಗ್ಗಟ್ಟಿನಿಂದ ರಾಷ್ಟ್ರಕಟ್ಟುಲು ಎಲ್ಲರೂ ಮುಂದಾಗಬೇಕಿದೆ ಎಂದು ಹೇಳಿದರು.