ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ವರುಣಾ ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವಿಲ್ಲವಾದರೂ, ಅಭಿವೃದ್ಧಿ ಕಾರ್ಯಗಳ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಲು ಶ್ರಮಿಸುವುದಾಗಿ ತಿಳಿಸಿದ್ದಾರೆ. ಚಿಕ್ಕಯ್ಯನ ತಾಂಡವಪುರ ಸೇರಿದಂತೆ 10 ಗ್ರಾಮಗಳಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದರು.

ಮೈಸೂರು(ಡಿ.6): ನಾವು ವರುಣಾ ಕ್ಷೇತ್ರದ ಎಷ್ಟೇ ಅಭಿವೃದ್ಧಿ ಕೆಲಸ ಮಾಡಿದರೂ ಕ್ಷೇತ್ರದ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ. ಆದರೂ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಕ್ಷೇತ್ರದ ಜನತೆಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಿ, ಅವರ ಋಣ ಭಾರವನ್ನು ಕಡಿಮೆ ಮಾಡಿಕೊಳ್ಳಲು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಈ ಹೇಳಿಕೆ ನೀಡಿದರು.

10 ಗ್ರಾಮಗಳಲ್ಲಿ ಹೆಚ್ಚುವರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಕ್ಷೇತ್ರದ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಯತೀಂದ್ರ ಅವರು, ಸಿಎಸ್‌ಆರ್ ನಿಧಿ (CSR Fund) ಮತ್ತು ಸರ್ಕಾರದ ಅನುದಾನದಡಿ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದರು. ಇದರೊಂದಿಗೆ ಮಲ್ಲುಪುರ ಶಾಲೆ, ಬಿದರಗೂಡು ಶಾಲೆ, ಮರಳೂರು ಶಾಲೆ, ನಗರ್ಲೆ ಶಾಲೆ, ಸುತ್ತೂರು ಶಾಲೆ, ಹಾರೋಪುರ ಶಾಲೆ ಸೇರಿದಂತೆ ಸುಮಾರು 10 ಗ್ರಾಮಗಳಲ್ಲಿ ಹೆಚ್ಚುವರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಿಎಂ ನೇತೃತ್ವದಲ್ಲಿ ವರುಣಾ ಮಾದರಿ ಕ್ಷೇತ್ರ: ಯತೀಂದ್ರ

ನಮ್ಮ ತಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಂದಿರಲಿಲ್ಲ. ಆದರೂ ಸ್ವಲ್ಪಮಟ್ಟಿಗೆ ಅಭಿವೃದ್ಧಿಗೆ ಗಮನ ನೀಡಲಾಗಿತ್ತು. ಆದರೆ ಈಗ ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾರೆ. ಹಾಗಾಗಿ ಕ್ಷೇತ್ರದ ಶಿಕ್ಷಣ, ಮೂಲಭೂತ ಸೌಲಭ್ಯಗಳಿಗೆ ಹಾಗೂ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತಿದ್ದು, ವರುಣಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು. ಇದೇ ವೇಳೆ, ಸಿದ್ದರಾಮಯ್ಯನವರನ್ನು ಎರಡು ಬಾರಿ ಮುಖ್ಯಮಂತ್ರಿಗಳಾಗಿ, ಒಂದು ಬಾರಿ ವಿರೋಧ ಪಕ್ಷದ ನಾಯಕರಾಗಿ ಮಾಡಿದ್ದೀರಿ. ನನ್ನನ್ನು ಸಹ ಒಂದು ಬಾರಿ ಶಾಸಕರಾಗಿ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ಇದೇ ರೀತಿ ನಿಮ್ಮ ಪ್ರೀತಿ ವಿಶ್ವಾಸ ಮುಂದೆಯೂ ಸಹ ಹೀಗೆ ಇರಲಿ ಎಂದು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.